ನವೆಂಬರ್ 11ರಂದು ಕೆಂಪೇಗೌಡರ 108 ಅಡಿ ಭವ್ಯ ಪ್ರತಿಮೆ ಅನಾವರಣ : ಕೆಂಪೇಗೌಡರ ಮೃತ್ತಿಕೆ ರಥಯಾತ್ರೆಗೆ ಚಾಲನೆ
ರಾಮನಗರ : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಪ್ರಯುಕ್ತ ನಾಡಿನಾದ್ಯಂತ ಹಮ್ಮಿಕೊಂಡಿರುವ ಮೃತ್ತಿಕಾ ಸಂಗ್ರಹ ಅಭಿಯಾನಕ್ಕೆ
ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಭಾನುವಾರ ಚಾಲನೆ ನೀಡಿದರು.
ಪವಿತ್ರ ಮಣ್ಣನ್ನು ಸಂಗ್ರಹಿಸುವ ವಾಹನವು ಬೆಳಿಗ್ಗೆ ಜಿಲ್ಲೆಯ ಗಡಿಯನ್ನು ಹೆಜ್ಜಾಲದಲ್ಲಿ ಪ್ರವೇಶಿಸುತ್ತಿದ್ದಂತೆಯೇ ಜನರು ನೂರಾರು ಬೈಕ್ ಗಳಲ್ಲಿ ಹಾಗೂ ಬೇರೆ ವಾಹನಗಳಲ್ಲಿ ಬಂದು ಸ್ವಾಗತಿಸಿದರು.
ಅಲ್ಲಿಂದ ಸಂಭ್ರಮದ ಘೋಷಣೆಗಳ ನಡುವೆ ರಾಮನಗರದ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಲಾಯಿತು. ಅಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಸೇರಿದಂತೆ ಅಪಾರ ಸಂಖ್ಯೆಯ ಜನರು ಹಾಜರಿದ್ದು ಅಭಿಯಾನವನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥನಾರಾಯಣ ಅವರು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನವೆಂಬರ್ 11ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪೇಗೌಡರ ಭವ್ಯ ಪ್ರತಿಮೆಯನ್ನು ಅನಾವರಣಗೊಳಿಸುತ್ತಾರೆ. ಈ ಕಾರ್ಯಕ್ರಮವನ್ನು ಹೆಚ್ಚು ಅರ್ಥಪೂರ್ಣಗೊಳಿಸುವ ಸಲುವಾಗಿ ರಾಜ್ಯದ ಎಲ್ಲಾ ಸ್ಥಳಗಳಿಂದ ಪವಿತ್ರ ಮಣ್ಣನ್ನು ಸಂಗ್ರಹಿಸಲಾಗುತ್ತಿದೆ. ಈ ಮಣ್ಣನ್ನು ಪ್ರತಿಮೆಯ ಉದ್ದೇಶಿತ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಬಳಸಲಾಗುತ್ತದೆ. ಇದು ರಾಜ್ಯದ ರಾಜಧಾನಿಯನ್ನು ನಿರ್ಮಿಸಿದ ಕೆಂಪೇಗೌಡರಿಗೆ ನಾಡಿನ ಜನರು ಸಲ್ಲಿಸುವ ಗೌರವವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಮೊದಲಿಗೆ ರಾಮನಗರದ ಚಾಮುಂಡೇಶ್ವರಿ ದೇವಸ್ಥಾನಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿಂದ ಮಣ್ಣು ಸಂಗ್ರಹಿಸಿದರು. ಬಳಿಕ ಕೆಂಗಲ್ ಗೆ ತೆರಳಿದ ಸಚಿವರು ಅಲ್ಲಿನ ಆಂಜನೇಯ ದೇವಸ್ಥಾನದಲ್ಲಿ ಮೃತ್ತಿಕೆ ಸಂಗ್ರಹಿಸಿದರು. ಕೆಂಗಲ್ ದೇವಸ್ಥಾನದ ನಂತರ ಕೆಂಗಲ್ ಹನುಮಂತಯ್ಯ ಅವರು ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಜಿಲ್ಲಾಧಿಕಾರಿ ಡಾ. ಅವಿನಾಶ ಮೆನನ್ ರಾಜೇಂದ್ರನ್, ಎಸ್ಪಿ ಕೆ. ಸಂತೋಷ ಬಾಬು, ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜು, ರಾಜ್ಯ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಗೌತಮ್ ಗೌಡ, ಮಾಗಡಿ ತಾಲ್ಲೂಕಿನ ಬಿಜೆಪಿ ಮುಖಂಡ ಪ್ರಸಾದ ಗೌಡ ಸೇರಿದಂತೆ ಅಪಾರ ಸಂಖ್ಯೆಯ ಕೆಂಪೇಗೌಡರ ಅಭಿಮಾನಿ ಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಹಿಸಿದ್ದರು.
“ಹಾಯ್ ರಾಮನಗರ” ಫೇಸ್ಬುಕ್ ಪುಟವನ್ನು ಫಾಲೋ ಮಾಡಿ :
https://www.facebook.com/HaiRamanagara
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :